ಬೆಂಗಳೂರು,ಸೆ,28: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು.
ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮಾಧ್ಯಮಗಳ ಜತೆ ಮಾತನಾಡಿದರು.
ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಸಿಂದಗಿ ಸಿಂಧಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಹಾನಗಲ್ ಕ್ಷೇತ್ರದಲ್ಲಿ ನಯಾಜ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.