ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ;ಎಚ್,ಡಿ.ಕೆ

Share

ವಿಜಯಪುರ,ಅ,21: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಸಿಂದಗಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಯಡಿಯೂರಪ್ಪ ಅವರು ಅಲ್ಪಸಂಖ್ಯಾತರರನ್ನು ಮತಕ್ಕಾಗಿ ಓಲೈಸುವ ಕೆಲಸ ಮಾಡುತ್ತಿದ್ದಾರಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.

ಒಂದೆಡೆ ಮುಸ್ಲೀಮರನ್ನು ದೇಶದಿಂದಲೇ ಓಡಿಸಬೇಕು ಎಂದು ಎನ್ನುವ ಬಿಜೆಪಿ, ಇನ್ನೊಂದೆಡೆ ಅವರಿಗೆ ನಾವೂ ಸಹಾಯ ಮಾಡಿದ್ದೇವೆ. ನಮಗೆ ವೋಟು ಕೊಡಬೇಕು ಎಂದು ಕೇಳುತ್ತಿದೆ. ದ್ವಿಮುಖ ನೀತಿ ಎಂದರೆ ಇದುವೇ ಎಂದು ಅವರು ಕಿಡಿಕಾರಿದರು.

ಮುಸ್ಲೀಮರು ನಮ್ಮ ಪರ ಇರಬೇಕು ಎನ್ನುವ ಬಿಜೆಪಿ, ಅವರನ್ನು ಸಮಾನವಾಗಿ ನೋಡಬೇಕಲ್ಲವೇ? ಹಾಗೆ ಮಾಡದೇ ಮತ ಮಾತ್ರ ಹಾಕಬೇಕು ಎಂದು ಕೇಳಿದರೆ ಹೇಗೆ? ಎಂದು ಹೆಚ್‌ಡಿಕೆ ಖಾರವಾಗಿ ಪ್ರಶ್ನಿಸಿದರು.

ಬಿಜೆಪಿಯು ಉಪ ಚುನಾವಣೆಯಲ್ಲಿ ಹಿಂದುತ್ವದ ಆಧಾರದ ಮೇಲೆ ಮತಯಾಚನೆ ಮಾಡುತ್ತಿದೆಯಲ್ಲ ಎನ್ನುವ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಹೆಚ್.ಡಿ ಕುಮಾರಸ್ವಾಮಿ , ಬಿಜೆಪಿಯವರು ಮಾತ್ರ ಹಿಂದುಗಳಾ? ನಾವೇನು ಹೊರಗಿನಿಂದ ಬಂದಿದ್ದೇವೆಯಾ? ನಮಗೂ ಹಿಂದುತ್ವವಿದೆ, ನಂಬಿಕೆ-ಶ್ರದ್ಧೆಗಳಿವೆ. ಆದರೆ ನಾವು ಎಲ್ಲರನ್ನೂ ಒಳಗೊಂಡು ರಾಜಕೀಯ ಮಾಡಿದರೆ, ಬಿಜೆಪಿಯವರು ಕೇವಲ ಹಿಂದುತ್ವದ ಆಧಾರದ ಮೇಲೆ ಮಾತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಹೊರಗೆ ನಾವೆಲ್ಲ ಒಂದು, ನಾವೆಲ್ಲ ಹಿಂದು ಎಂದು ಹೇಳುತ್ತಲೇ ಒಳಗೆ ಮಾತ್ರ ಗರ್ಭಗುಡಿ ಸಂಸ್ಕೃತಿಯನ್ನು ಜೀವಂತ ಇಟ್ಟುಕೊಂಡಿದೆ ಬಿಜೆಪಿ. ಕೆಲವನ್ನು ಬಿಟ್ಟರೆ ದೀನ ದಲಿತರು, ಶೋಷಿತರಿಗೆ ಅಲ್ಲಿಗೆ ಪ್ರವೇಶಾ ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಸಿಂದಗಿಯನ್ನು ನಿರ್ಲಕ್ಷಿಸಿದ ರಾಷ್ಟ್ರೀಯ ಪಕ್ಷಗಳು:

ಕಳೆದ ಐವತ್ತು ವರ್ಷಗಳಿಂದ ಸಿಂದಗಿ ಕ್ಷೇತ್ರವನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಸಮಾನವಾಗಿ ಕಡೆಗಣಿಸಿವೆ. ಇಲ್ಲಿನ ಪರಿಸ್ಥಿತಿ ನೋಡಿದರೆ ಎಲ್ಲ ರಾಜಕೀಯ ಪಕ್ಷಗಳೂ ತಲೆತಗ್ಗಿಸುವಂತೆ ಇದೆ. ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಕೊಟ್ಟ ನೀರಾವರಿ ಯೋಜನೆಗಳು ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಕೈಗೊಂಡ ಕಾರ್ಯಕ್ರಮಗಳು ಬಿಟ್ಟರೆ ಬೇರಾವ ಪ್ರಗತಿಯೂ ಇಲ್ಲಿ ಆಗಿಲ್ಲ ಎಂದು ಹೆಚ್.ಡಿಕೆ ಬೇಸರ ವ್ಯಕ್ತಪಡಿಸಿದರು.

14 ತಿಂಗಳು ನಾನು ಮುಖ್ಯಮಂತ್ರಿ ಆಗಿದ್ದಾಗ 1200 ಕೋಟಿ ರೂ. ಅನುದಾನವನ್ನು ಸಿಂದಗಿ ಕ್ಷೇತ್ರಕ್ಕೆ ನೀಡಿದ್ದೇನೆ. ದೇವೇಗೌಡರು ಇಲ್ಲದಿದ್ದರೆ ನಾವಿಲ್ಲಿ ಭತ್ತ, ಕಬ್ಬು ಬೆಳೆಯಲು ಸಾಧ್ಯವೇ ಆಗುತ್ತಿರಲಿಲ್ಲ ಎಂದು ಇಲ್ಲಿನ ಜನ ಈಗಲೂ ಮಾತನಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಹೆಚ್.ಡಿ ಕುಮಾರಸ್ವಾಮಿ, ಅಲ್ಪಸಂಖ್ಯಾತರ ವಿಷಯದ ಬಗ್ಗೆ ನಾನು ಕೇಳಿದ ಐದು ಪ್ರಶ್ನೆಗಳಿಗೆ ಇನ್ನೂ ಸಿದ್ದರಾಮಯ್ಯ ಅವರಾಗಲಿ ಅಥವಾ ಕಾಂಗ್ರೆಸ್‌ ಆಗಲಿ ಉತ್ತರ ನೀಡಿಲ್ಲ. ಅದರ ಹೊರತಾಗಿ ಅನಗತ್ಯ ವಿಷಯಗಳ ಬಗ್ಗೆ ಆ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆಂದು ಕುಮಾರಸ್ವಾಮಿ ಅವರು ಹೇಳಿದರು.

ವೈಯಕ್ತಿಕ ವಿಚಾರಗಳ ಬಗ್ಗೆ ಆಸಕ್ತಿ ಇಲ್ಲ:

ಯಾರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡುವ ಆಸಕ್ತಿ ನನಗಿಲ್ಲ. ನನ್ನ ಬಗ್ಗೆ ಕಾಮೆಂಟ್‌ ಮಾಡೋರನ್ನು ನಾನು ಕೇರ್‌ ಮಾಡಲ್ಲ. ಜನರಿಗೆ ಮಾಡುವ ಕೆಲಸ ಬೇಕಾದಷ್ಟಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜನರು ಅನೇಕ ಸಮಸ್ಯೆಗಳಿಂದ ಒದ್ದಾಡುತ್ತಿದ್ದಾರೆ. ಅವರಿಗೆ ಪರಿಹಾರ ಕೊಡುವುದು ಎಲ್ಲರ ಆದ್ಯತೆ ಆಗಬೇಕು ಎಂದರಲ್ಲದೆ; ನಾನು ಆರ್‌ ಎಸ್‌ ಎಸ್‌ ಸೇರಿಂದತೆ ಯಾವುದೇ ಸಂಘ ಸಂಸ್ಥೆ ಬಗ್ಗೆ ವೈಯಕ್ತಿಕ ನೆಲೆಗಟ್ಟಿನಲ್ಲಿ ಮಾತನಾಡಿಲ್ಲ. ನನ್ನ ಅನುಭವಕ್ಕೆ ಬಂದ, ನನಗೆ ತಿಳಿದ ವಿಷಯಗಳನ್ನಷ್ಟೇ ಹೇಳಿದ್ದೇನೆ ಎಂದು ತಿಳಿಸಿದರು.

Girl in a jacket
error: Content is protected !!