ಶಿವಮೊಗ್ಗ,ಏ,12-: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.
ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ ಮಾಡುವ ಕ್ರಮ ಎಂದು ಟೀಕಿಸಿದರು.
ಮುಸ್ಲಿಂ ಯುವಜನರು ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳುವುದಾದರೆ 20 ಲಕ್ಷದ ಬದಲು 30 ಲಕ್ಷ ಕೊಡುತ್ತಿದ್ದಾರೆ. ನಿಮಗೆ ಹಿಂದೂಗಳು ಕಾಣುವುದಿಲ್ಲವೇ? ನಮ್ಮ ಹಿಂದೂಗಳು ನಿಮಗೆ ಮಾಡಿದ ಅನ್ಯಾಯವಾದರೂ ಏನು ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.
ಮುಸಲ್ಮಾನರನ್ನು ಓಲೈಸುವ ಮತ್ತು ಹಿಂದೂಗಳಿಗೆ ಅವಮಾನ ಮಾಡುವ ರಾಜಕೀಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದಕ್ಕಾಗಿ ಬಿಜೆಪಿ ಜನಾಕ್ರೋಶ ಯಾತ್ರೆ ಪ್ರಾರಂಭಿಸಿದೆ ಎಂದು ನುಡಿದರು.
ಹಾಲಿನ ದರ 9 ರೂ. ಹೆಚ್ಚಿಸಿದ್ದು, ಬಡಜನರು ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯ ಆಗುತ್ತಿಲ್ಲ. ಕಾಂಗ್ರೆಸ್ ಸರಕಾರವು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ರೈತರು ಟ್ರಾನ್ಸ್ಫಾರ್ಮರ್ ಹಾಕಿಸಿಕೊಳ್ಳಲು ಹಿಂದೆ ಬಿಜೆಪಿ ಸರಕಾರ ಇದ್ದಾಗ 25 ಸಾವಿರ ಖರ್ಚು ಮಾಡಬೇಕಿದ್ದರೆ, ಈಗ ಸಿದ್ದರಾಮಯ್ಯನವರ ರೈತಪರ ಎನ್ನುವ ಸರಕಾರ ಬಂದ ಬಳಿಕ 2.5 ರಿಂದ 3 ಲಕ್ಷ ಹಣವನ್ನು ರೈತರು ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. ದಲಿತರ ಅಭ್ಯುದಯಕ್ಕೆ ಬಳಕೆ ಆಗಬೇಕಿದ್ದ 38 ಸಾವಿರ ಕೋಟಿ ಎಸ್ಇಟಿ, ಟಿಎಸ್ಪಿ ಹಣವನ್ನು ಸಿದ್ದರಾಮಯ್ಯನವರು ದುರುಪಯೋಗ ಮಾಡುತ್ತಿದ್ದಾರೆ ಎಂದು ದೂರಿದರು.
ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ದೇಶದ ಸಮರ್ಥ ಆಡಳಿತದ ಪರಿಣಾಮವಾಗಿ ಜಗತ್ತಿನ 5ನೇ ಪ್ರಮುಖ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ ಎಂದು ಅವರು ವಿವರಿಸಿದರು.
ಚುನಾವಣೆಗಾಗಿ ಈ ಹೋರಾಟವಲ್ಲ; ಅಧಿಕಾರ ಹಿಡಿದ ರಾಜ್ಯದ ಕಾಂಗ್ರೆಸ್ ಸರಕಾರ ಜನವಿರೋಧಿಯಾಗಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಹಿಂದೂ ವಿರೋಧಿ ಸರಕಾರವನ್ನು ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ ಇಂದು “ರಾಮಣ್ಣ ಶ್ರೇಷ್ಠಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಗೋಪಿ ವೃತ್ತ” ತಲುಪಿತು. ಬಳಿಕ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಮತ್ತು ಶಾಸಕ ಅರಗ ಜ್ಞಾನೇಂದ್ರ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಶಾಸಕ ಚನ್ನಬಸಪ್ಪ, ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಮಾಜಿ ಶಾಸಕರಾದ ಕುಮಾರಸ್ವಾಮಿ, ಅಶೋಕ್ ನಾಯಕ್, ವಿಧಾನಪರಿಷತ್ ಮಾಜಿ ಸದಸ್ಯ ರುದ್ರೇಗೌಡ, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.