ಬೆಂಗಳೂರು,ಮೇ,೨೬– ಕಳೆದ ಎರಡು ದಿನಗಳಿಂದ ರಾಜ್ಯದ ಹಲವಾರು ಕಡೆ ಸುರಿಯುತ್ತಿರುವ ಮಳೆಯಿಂದ ಹಲವಾರು ಜಾಶಯಗಳು ತುಂಬಿದ್ದು, ಹಲವು ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿ ಬೆಳಗಾವಿಯಲ್ಲಿ ಮನೆ ಕುಸಿದು ಬಾಲಕನೊಬ್ಬ ಸಾವನ್ನಪ್ಪಿದ್ದರೆ,ಬೆಂಗಳೂರಿನಲ್ಲು ಮಳೆಗೆ ಇಬ್ಬರು ಬಲಿಯಾಗಿದ್ದಾರೆ.
ಬೆಳಗಾವಿ,ಮಂಗಳೂರು ಉತ್ತರ ಕನ್ನಡ,ಸೇರಿದಂತೆ ರಾಜ್ಯದ ವಿವಿಧ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆ ನೀರಿನಿಂದ ಜನ ಜೀವನ ಅಸ್ತವ್ಯಸ್ತವಾಗಿದೆ, ಬೆಂಗಳೂರಿನಲ್ಲಿ ಹಲವಾರು ಪ್ರದೇಶಗಳು ಜಲಾವೃತವಾಗಿವೆ, ಇಂದು ಬೆಳಿಗ್ಗೆ ಸುರಿದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೂ ತೊಡಕಾಗಿದೆ.
ಹಲವಾಮಾನ ಇಲಖೆ ಪ್ರಕಾರ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ೬ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುತ್ತಿದೆ. ಇದರಿಂದ ಮೇ ೩೦ರವರೆಗೆ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಳೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ಅತಿಹೆಚ್ಚು ಮಳೆಯಾದ ವರದಿಯಾಗಿದೆ. ೨೭ ಸೆ.ಮೀ ಮಳೆ, ಬಾಗಮಂಡಲದಲ್ಲಿ ೨೩ ಸೆ.ಮೀ ಹಾಗೂ ಮುಲ್ಕಿಯಲ್ಲಿ ೨೦ ಸೆಂ.ಮೀ ಮಳೆಯಾಗಿದೆ. ಬೆಂಗಳೂರಲ್ಲಿ ಸಾಧರಣ ಮಳೆಯಾಗುತ್ತಿದೆ.