ಬೆಂಗಳೂರು, ಏ, 08: ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಕರ್ನಾಟಕ ಪ್ರಗತಿಪರವಾದ ರಾಜ್ಯವಾಗಿದ್ದು, ಇದಕ್ಕೆ ಕೆಟ್ಟ ಹೆಸರು ತರಲು ಕೆಲವರು ಪದೇ ಪದೇ ಹೀಗೆ ಮಾಡುತ್ತಿದ್ದಾರೆ. ಪೋಲಿಸ್ ಅಧಿಕಾರಿಗಳಿಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಸುದ್ದಿಗಾರರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು.
ಈ ಕುರಿತು ಎಲ್ಲಾ ಕಡೆ ತಪಾಸಣೆ ಮಾಡಲು ತಿಳಿಸಿದ್ದು, ಕರೆ ಮಾಡಿದವರ ವಿವರಗಳನ್ನು ಕಲೆ ಹಾಕಿ ಅವರನ್ನು ಬಂಧಿಸಲಾಗುವುದು. ಸುರಕ್ಷತಾ ಕ್ರಮ ಹಾಗೂ ತನಿಖಾ ಕ್ರಮಗಳನ್ನು ಖಂಡಿತವಾಗಿಯೂ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
*ಪೋಷಕರು ಧೈರ್ಯವಾಗಿರಲಿ:*
ಶಾಲಾ ಪೋಷಕರು ಧೈರ್ಯವಾಗಿರಲಿ. ಆತಂಕ ಪಡುವ ಅಗತ್ಯವಿಲ್ಲ. ನಾವು ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ರೀತಿಯ ಆತಂಕಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.