ಬೆಂಗಳೂರು,ಜೂ,06– ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡಿದರು.ಏಕೆಂದರೆ, ವಿಜಯೋತ್ಸವ ಆಚರಣೆಗೆ ಇದಕ್ಕೆ ಮೊದಲೇ ಆರ್ ಸಿಬಿ ಪೊಲೀಸರ ಅನುಮತಿ ಕೇಳಿತ್ತು. ಆ ಮನವಿಯನ್ನು ಪೊಲೀಸರು ತಿರಸ್ಕರಿಸಿದ್ದರು. ಹಾಗಿದ್ದರೂ ವಿಜಯೋತ್ಸವ ಆಗಲೇಬೇಕು ಎಂದು ಸಿಎಂ ತಾಕೀತು ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ಹನ್ನೊಂದು ಜನರ ಸಾವಿಗೆ ಸಿಎಂ, ಡಿಸಿಎಂ ಹಾಗೂ ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಅವರೇ ಕಾರಣ. ಮಾತೆತ್ತಿದರೆ ನಾವು ಜನರ ಪರ ಎಂದು ರಾಗಾ ತೆಗೆಯುವ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇವರಿಂದ ರಾಜಿನಾಮೆ ಪಡೆಯಬೇಕು. ಮಾತೆತ್ತಿದರೆ ಸಿಎಂ ಗೋವಿಂದ.. ಗೋವಿಂದ.. ಎನ್ನುತ್ತಾರಲ್ಲ.. ಈ ದುರಂತಕ್ಕೆ ಮೂಲ ಪುರುಷನೇ ಆತ ಎಂದು ಕೇಂದ್ರ ಸಚಿವರು ಆರೋಪಿಸಿದರು.
ತಪ್ಪ ಮಾಡಿದ್ದು ಸರ್ಕಾರ, ಶಿಕ್ಷೆಗೆ ಗುರಿಯಾಗಿದ್ದು ಅಧಿಕಾರಿಗಳು. ದಕ್ಷ ಪೊಲೀಸ್ ಆಯುಕ್ತ ದಯಾನಂದ್ ಅವರೂ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸಂದೇಶ ನೀಡಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು
ದಯಾನಂದ್ ಅವರು ಹೊಸ ವರ್ಷದ ಆಚರಣೆ, ಅನೇಕ ಕ್ರಿಕೆಟ್ ಪಂದ್ಯಗಳು ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು. ಹೊಸ ವರ್ಷದ ಹಿಂದಿನ ಮಹಾತ್ಮಾ ಗಾಂಧಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಿದ್ದರು, ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ ಇವರು ಯಾವ ರೀತಿಯ ಸಂದೇಶ ನೀಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಕಾಂಗ್ರೆಸ್ ಹೈಕಮಾಂಡ್ ಎನ್ನುವುದು ಇದ್ದರೆ, ಅದಕ್ಕೆ ಸಂಕೋಚ ನಾಚಿಕೆ ಎನ್ನುವುದು ಇದ್ದರೆ ಮೊದಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ತೆಗೆದು ಅವರ ಜಾಗಕ್ಕೆ ಸಭ್ಯರನ್ನು ತರಬೇಕು. ಕುಮಾರಸ್ವಾಮಿ ಅವರು ಮಾತಾಡಿದರೆ ಅಸೂಯೆ ಎಂದು ಟೀಕೆ ಮಾಡುತ್ತಾರೆ. ನಾನು ಮಂತ್ರಿ ಆಗಿದ್ದೇನೆ. ಪ್ರಧಾನಿ ಮೋದಿ ಅವರು ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ಅವರ ದೂರದೃಷ್ಟಿ ಅನುಸಾರ ಉತ್ತಮವಾಗಿ ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ನನಗೆ ಅಸೂಯೆ ಎನ್ನುವುದು ಯಾಕೆ ಬರುತ್ತದೆ ಎಂದು ಅವರು ಕುಟುಸಿದರು.
ಹೆಚ್ಎಂಟಿಗೆ ಕಾಯಕಲ್ಪ ನೀಡಲು ಪ್ರಯತ್ನ ಮಾಡುತ್ತಿದ್ದೇನೆ. ವೈಝಾಗ್ ಸ್ಟೀಲ್ ನಂತರ, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸೇಲಂ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನ ಮಾಡುವ ಪ್ರಯತ್ನ ನಡೆಯುತ್ತಿದೆ. ಕುಮಾರಸ್ವಾಮಿ ಎಲ್ಲಿ ಹೆಚ್ ಎಂಟಿಯನ್ನು ಉಳಿಸಿಬಿಡುತ್ತಾನೋ ಎಂದು ಆ ಕಾರ್ಖಾನೆಯ ಒಳಿತಿಗಾಗಿ ಪ್ರಯತ್ನಿಸಿದ ಐಎಫ್ಎಸ್ ಅಧಿಕಾರಿಯನ್ನು ಅಮಾನತು ಮಾಡಿದೆ ಈ ಸರ್ಕಾರ. ನನ್ನ ಅನುಭವದಲ್ಲಿ ಇಂತಹ.ಕೆಟ್ಟ ಸರ್ಕಾರವನ್ನು ನಾನು ಎಂದು ನೋಡಿಲ್ಲ, ಇಂತಹ ಕೆಟ್ಟ ಮುಖ್ಯಮಂತ್ರಿಯನ್ನು ಎಂದೂ ಕಂಡಿಲ್ಲ ಎಂದು ಕೇಂದ್ರ ಸಚಿವರು ಹರಿಹಾಯ್ದರು.
ಕಪ್ ಗೆದ್ದವರು ಆಟಗಾರರು. ಅದರೇ ಡಿಕೆಶಿಗೆ ತಾನೇ ಕಪ್ ಗೆದ್ದಷ್ಟು ಉಮೇದು. ಅಲ್ಲಿಂದಲೇ ಕಪ್ ಗೆ ಅವರಿಂದ ಮುತ್ತಿನ ಸುರಿಮಳೆ ಶುರುವಾಯಿತು. ಅಲ್ಲಿ ಡಿಸಿಎಂ ಅವರು ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ಕೊಟ್ಟರು. ಆದರೆ ಡಿಸಿಎಂ ಅವರು ಕನ್ನಡ ಶಾಲು ಹಾಕಿಕೊಳ್ಳದೆ ಕುತ್ತಿಗೆಯ ಸುತ್ತ ವಿದೇಶಿ ಮಫ್ಲರ್ ಹಾಕಿದ್ದರು. ಆದರೆ, ಕೊಹ್ಲಿ ಪುನಾ ಆ ಕನ್ನಡ ಬಾವುಟವನ್ನು ಡಿಕೆಶಿಗೆ ವಾಪಸ್ಸು ಕೊಟ್ಟರು. ಇಷ್ಟೆಲ್ಲಾ ನಾಟಕ ಆಡುವ ಅಗತ್ಯ ಇದೆಯಾ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
ವಿಧಾನಸೌಧ ಮೆಟ್ಟಿಲು ಮೇಲಿನ ವೇದಿಕೆಯಲ್ಲಿ ನಡೆದ ವಿಜಯೋತ್ಸವ ಸರ್ಕಾರಿ ಕಾರ್ಯಕ್ರಮ ಆಗಿರಲಿಲ್ಲ. ಮಂತ್ರಿಗಳ ಮಕ್ಕಳು, ಮೊಮ್ಮಕ್ಕಳು ಸೇರಿ ಕುಟುಂಬದ ಕಾರ್ಯಕ್ರಮ ಆಗಿತ್ತು. ಸನ್ ಗ್ಲಾಸ್ ಹಾಕಿಕೊಂಡು ಎಲ್ಲಾರೂ ಪೋಸ್ ಕೊಟ್ಟಿದ್ದೇ ಕೊಟ್ಟಿದ್ದು. ವೇದಿಕೆಯ ಮೇಲೆಯೇ ಡಿಕೆಶಿ ಒಬ್ಬರ ಮೇಲೆ ಹಲ್ಲೆ ನಡೆಸಿ ಕುತ್ತಿಗೆ ಹಿಡಿದು ಆಚೆ ತಳ್ಳಿದರು. ಇದೆಲ್ಲಾ ಏನು? ಅಸಹ್ಯ ಅಲ್ಲವೇ? ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ರವಿಕುಮಾರ್, ಶ್ರೀ ಹರೀಶ್ ಪೂಂಜಾ, ಮಾಜಿ ಶಾಸಕರಾದ ಹೆಚ್.ಎಂ. ರಮೇಶ್ ಗೌಡ ಚೌಡರೆಡ್ಡಿ ತೂಪಲ್ಲಿ ಮುಂತಾದವರು ಉಪಸ್ಥಿತರಿದ್ದರು.