ಬೆಂಗಳೂರು,ಮೇ,27:ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮೀತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಭಾಗವಹಿಸಿದ್ದರು.
ಮೇಕೆದಾಟು ಯೋಜನೆ ಪ್ರದೇಶ ವ್ಯಾಪ್ತಿಯ ಕಚ್ಚಾ ರಸ್ತೆಯ ಕುರಿತಂತೆ ತಮಿಳುನಾಡಿನ ಪತ್ರಿಕೆಯಲ್ಲಿ ವರಸಿ ಪ್ರಕಟವಾಗಿದೆ. ಅದನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಹಸಿರು ಪೀಠ ಸಮಿತಿಯೊಂದನ್ನು ರಚನೆ ಮಾಡಿದೆ. ಅದು ಸಮಂಜಸವಾದ ಕ್ರಮ ಅಲ್ಲ. ಹೀಗಾಗಿ ಈ ಆದೇಶವನ್ನು ಹಸಿರು ಪೀಠದ ಮುಂದೆಯೇ ಪ್ರಶ್ನಿಸಲು ನಾವು ನಿರ್ಧರಿಸಿದ್ದೇವೆ. ರಾಷ್ಟ್ರೀಯ ಹಸಿರು ಪೀಠ ತನ್ನ ಈ ಆದೇಶವನ್ನು ಮರು ಪರಿಶೀಲಿಸಬೇಕೆಂದು ಮನವಿ ಮಾಡಿಕೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.