ಬೆಳಗಾವಿ,ಮೇ,21:ಸದಾ ರೈತ ಚಳವಳಿ ಮೂಲಕ ರೈತರ ಸಮಸ್ಯೆ ಗಳ ಬಗ್ಗೆ ಧ್ವನಿ ಎತ್ತುದ್ದಿದ್ದ ,ರೈತ ನಾಯಕ ಬಾಬುಗೌಡ ಪಾಟೀಲ್ ಧ್ವನಿ ನಿಂತುಹೋಗಿದೆ.
ಅನಾರೋಗ್ಯದಿಂದ ಬಳಲುತ್ತುದ್ದ ಬಾಬಾಗೌಡ ಪಾಟೀಲ (78) ಇಲ್ಲಿನ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾದ ಅವರು ರೈತ ಸಂಘದ ಮೂಲಕ ಹೋರಾಟ ಆರಂಭಿಸಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 1998ರಲ್ಲಿ ಸ್ಪರ್ಧಿಸಿ ಇಲ್ಲಿ ಬಿಜೆಪಿಯ ಗೆಲುವಿನ ಖಾತೆ ಆರಂಭಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರೂ ಆಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಯೊಂದಿಗಿನ ಸಖ್ಯವನ್ನು ಕಡಿಮೆ ಮಾಡಿಕೊಳ್ಳುತ್ತಾ ಹೋಗಿದ್ದರು.
ರೈತ ಪರ ಹೋರಾಟದ ಮುಂಚೂಣಿಯಲ್ಲಿದ್ದರು. ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ರೈತರಿಗೆ ಮರಣಶಾಸನವಾಗಿದೆ ಎಂದು ಹೇಳುತ್ತಾ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದರು. ಕಿಸಾನ್ ಮಹಾಪಂಚಾಯತ್ ನಲ್ಲೂ ಮುಂಚೂಣಿಯಲ್ಲಿದ್ದರು. ಈಚೆಗೆ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡಿದ್ದರು. ಕಾಂಗ್ರೆಸ್ನ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.