ಶಶಿಕಲಾಗೆ ಜೈಲಿನಲ್ಲಿ ವಿಶೇಷ ಅತಿಥ್ಯ: ೨ತಿಂಗಳಲ್ಲಿ ವರದಿ ಸಲ್ಲಿಸಲು ಹೈ ಗಡವು

Share

ಬೆಂಗಳೂರು,ಜೂ,೧೧: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ ವಿಶೇಷ ಆತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇನ್ನೂ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವಿಕೆ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಜೈಲು ವರಿಷ್ಠಾಧಿಕಾರಿಗಳು ಲಂಚ ಪಡೆದು ಜೈಲಿನಲ್ಲಿ ಆಕೆಗೆ ವಿಶೇಷ ಸೌಲಭ್ಯಗಳನ್ನು ಒದಗಿಸಿದ್ದರು ಎಂಬ ಗಂಭೀರ ಆರೋಪ ವ್ಯಾಪಕ ಸದ್ದು ಮಾಡಿತ್ತು. ಇದೇ ವಿಚಾರವಾಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸಿ ದಾಖಲಿಸಿರುವ ಎಫ್‌ಐಆರ್‌ಗೆ ಎರಡು ತಿಂಗಳೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


ಈ ಹಿಂದಿನ ವಿಚಾರಣೆಯಲ್ಲಿ ೨೦೧೮ ರಲ್ಲಿ ಎಸಿಬಿಯಿಂದ ಎಫ್‌ಐಆರ್ ದಾಖಲಿಸಲ್ಪಟ್ಟಿದ್ದು, ಕೋವಿಡ್-೧೯ ರ ದೃಷ್ಟಿಯಿಂದ ವರದಿ ಸಲ್ಲಿಸಲು ನಾಲ್ಕು ತಿಂಗಳ ಕಾಲಾವಕಾಶ ಬೇಕು ಎಂದು ರಾಜ್ಯ ಸರ್ಕಾರ ನ್ಯಾಯಾಲಯವನ್ನು ಕೇಳಿತ್ತು. ಇದೇ ವಿಚಾರವಾಗಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ಇಂದು ಈ ಆದೇಶ ನೀಡಿದೆ.
’ತನಿಖೆಯಲ್ಲಿ ವಿಳಂಬವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಅಂತಿಮ ವರದಿ ಸಲ್ಲಿಸಲು ಸರ್ಕಾರಕ್ಕೆ ನಾಲ್ಕು ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿತು. ಅಂತಿಮ ವರದಿಯನ್ನು ಸಾಧ್ಯವಾದಷ್ಟು ಬೇಗ ೨ ತಿಂಗಳೊಳಗೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಚೆನ್ನೈನ ಆಳ್ವಾರ್ ಪೇಟ್‌ನ ಸಮಾಜ ಸೇವಕ ಮತ್ತು ಶಿಕ್ಷಣ ತಜ್ಞ ಕೆ.ಎಸ್.ಗೀತಾ (೬೫ ವರ್ಷ) ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ಆದೇಶ ನೀಡಿದೆ. ಅರ್ಜಿಯಲ್ಲಿ ಶಶಿಕಲಾ ಅವರಿಗೆ ಜೈಲಿನಲ್ಲಿ ಅಧಿಕಾರಿಗಳಉ ಲಂಚ ಪಡೆದು ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಈ ತನಿಖೆಯಲ್ಲೂ ವಿಳಂಬವಾಗುತ್ತಿದ್ದು, ಈ ಸಂಬಂಧ ಆದೇಶ ಹೊರಡಿಸುವಂತೆ ಕೋರಿದ್ದರು.

Girl in a jacket
error: Content is protected !!